ವಂದಿಸುವುದಾದಿಯಲಿ

 

ವಂದಿಸುವುದಾದಿಯಲಿ ಗಣನಾಥನ                    ||ಪ||

ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು         ||ಅ.ಪ||


ಹಿಂದೆ ರಾವಣ ತಾನು ವಂದಿಸದೆ ಗಜಮುಖನ

ನಿಂದು ತಪವನುಗೈದು ವರ ಪಡೆಯಲು

ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ

ತಂದ ವರಗಳನೆಲ್ಲ ಧರೆಗೆ ಇಳಿಸಿದನು                ||ವಂದಿಸು||


ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ

ಮುಂದೆ ಗಣಪನ ಪೂಜಿಸೆಂದು ಪೇಳೆ

ಒಂದೇ ಮನದಲಿ ಬಂದು ಪೂಜಿಸಲು ಗಣನಾಥ

ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು               ||ವಂದಿಸು||


ಇಂದು ಜಗವೆಲ್ಲ ಉಮೆನಂದನನ ಪೂಜಿಸಲು

ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು

ತಂದೆ ಸಿರಿಪುರಂದರವಿಠಲನ ಸೇವೆಯೊಳು

ಬಂದ ವಿಘ್ನವ ಕಳೆದಾನಂದವನು ಕೊಡುವ            ||ವಂದಿಸು||


Comments

Popular Posts